ಕಡಬ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಸ್ವಲ್ಪ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಪರಿಸ್ಥಿತಿಯಿರುವ ಕಾರಣ ಇಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ತಮ್ಮ ಮನೆಗಳನ್ನು ತೊರೆದು ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದರು. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ಆಸುಪಾಸಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚಿಸಲಾಗಿದೆ. ಇದರಿಂದಾಗಿ ಸುತ್ತಲ ಪರಿಸರದ ಜನರು ಪರದಾಡುವಂತಾಗಿದೆ.



