ಜಾರ್ಖಂಡ್: ಭಾರತೀಯ ಸಂಸ್ಕೃತಿಯಲ್ಲಿ ಬಿಂದಿಗೆ ಮಹತ್ವದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಮೌಲ್ಯವಿದೆ. ಆದರೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕ ಥಳಿಸಿದ್ದಾನೆ. ಇದರಿಂದಾಗಿ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಮಂಗಳವಾರ ಟ್ವೀಟ್ ಮಾಡಿದ್ದು, ವಿದ್ಯಾರ್ಥಿನಿಯೊಬ್ಬಳು ‘ಬಿಂದಿ’ ಧರಿಸಿ ಶಾಲೆಗೆ ಹೋಗಿದ್ದಕ್ಕಾಗಿ ಶಿಕ್ಷಕ ಕಪಾಳಮೋಕ್ಷ ಮಾಡಿದ್ದಾರೆ. ಶಿಕ್ಷಕನ ವರ್ತನೆಯಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಈ ವಿಷಯವನ್ನು ಎನ್ಸಿಪಿಸಿಆರ್ ಗಂಭೀರವಾಗಿ ತೆಗೆದುಕೊಂಡಿದೆ. ತನಿಖೆಗಾಗಿ ನಮ್ಮ ತಂಡ ಧನ್ಬಾದ್ಗೆ ತೆರಳಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಮೃತ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ವಿದ್ಯಾರ್ಥಿನಿ ಆತ್ಮಹತ್ಯೆ ಪತ್ರವನ್ನು ತನ್ನ ಸಮವಸ್ತ್ರದಲ್ಲಿ ಇಟ್ಟುಕೊಂಡಿದ್ದು ಪೊಲೀಸರಿಗೆ ದೊರೆತಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ನ ಧನ್ಬಾದ್ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷ ಉತ್ತಮ್ ಮುಖರ್ಜಿ ಮಾಹಿತಿ ನೀಡಿದರು. ಧನ್ಬಾದ್ನ ಟೆತುಲ್ಮರಿ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ.



