ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದಯ ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ.

ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಶೀಘ್ರವೇ ದರೋಡೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ಐವರ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರ ವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.



