ಕರ್ನಾಟಕದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಆವಾಂತಗಳೇ ಸೃಷ್ಟಿಸಿದೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರಿಂದ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಬಳಿಕ ಮೇ 31 ರಿಂದ ಮಳೆ ತೀವ್ರತೆ ಕಡಿಮೆ ಆಗುವ ಸಾಧ್ಯತೆಯಿದೆ ಎಂದಿದ್ದಾರೆ.

ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ರೆ, ಇತ್ತ ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಇನ್ನು ಬೆಳಗಾವಿ,ಧಾರವಾಡ,ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಬೆಂಗಳೂರಿನಲ್ಲೂ ಸಹ ಈ ತಿಂಗಳ ಅಂತ್ಯದವರೆಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದರು.



