ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧಿಸಲಾಗಿದೆ.

ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಮಿಸ್ಟರ್ ಅಟಿಟ್ಯೂಡ್ 22 ಎಂಬ ಇನ್ಸ್ಟಗ್ರಾಮ್ ಪೇಜ್ ನಲ್ಲಿ ಬಜ್ಪೆ ನಿಸರ್ಗ ಹೋಟೆಲ್ನ ಫೋಟೊ ಬಳಸಿಕೊಂಡು ಅದರ ಮೇಲೆ ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಟ್ಟೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್ ಬಜ್ಜೆ ಇಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಅಪರಾಧಿಗಳೊಟ್ಟಿಗೆ ಸೇರಿಕೊಂಡು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಇಲ್ಲಿ ಪೊಲೀಸ್ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ ಎಂದು ಪೊಲೀಸರನ್ನು ನಿಂದಿಸಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಚ್ಛೆ ಪೊಲೀಸರು ಆರೋಪಿ ಅಭಿಷೇಕ್ನನ್ನು ಬಂಧಿಸಿದ್ದಾರೆ. ಅಭಿಷೇಕ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ, ಕೊಲೆಯತ್ನ, ಹಲ್ಲೆ ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆಗಾಗಿ ಸೆನ್ ಪೊಲೀಸರ ವಶಕ್ಕೆ ಒಪ್ಪಿಸಿದ್ದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



