ಅಬ್ದುಲ್ ರಹ್ಮಾನ್ ಕೊಲೆ ಕೃತ್ಯದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಎಸ್ಡಿಪಿಐ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ದ.ಕ. ಜಿಲ್ಲಾ ಸಮಿತಿಯು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿತು. ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮುನೀಶ್ ಅಲಿ ಮಾತನಾಡಿ ರಹ್ಮಾನ್ ಕೊಲೆ ಪ್ರಕರಣದಲ್ಲಿ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯು ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಕೊಲೆಯಾದ ರಹ್ಮಾನ್ ಮತ್ತು ಗಾಯಾಳು ಕಲಂದರ್ ಶಾಫಿ ಕುಟುಂಬಸ್ಥರು ಇನ್ನೂ ಕೂಡ ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾರೆ.

ರಹ್ಮಾನ್ ಕೊಲೆ ಆರೋಪಿಗಳ ವಿರುದ್ಧ ದಾಖಲಿಸಲಾದ ಕೊಕ ಕಾಯ್ದೆಗೆ ಸಂಬಂಧಿಸಿ ಸರಕಾರಿ ಅಭಿಯೋಜಕರ ತರಾತುರಿಯ ಪ್ರಕ್ರಿಯೆ ಅಚ್ಚರಿ ಹುಟ್ಟಿಸಿದೆ ಎಂದರು. 90 ದಿನಗಳೊಳಗೆ ಕೋರ್ಟ್ಗೆ ನೀಡಬೀಕಿದ್ದ ತನಿಖಾ ವರದಿ 91ನೇ ದಿನಕ್ಕೆ ನೀಡಿರುವುದರ ಬಗ್ಗೆ ಸಂಶಯವಿದೆ. ನ್ಯಾಯ ಸಿಗೋವರೆಗೂ ನಾವು ರಸ್ತೆ, ಕೋರ್ಟ್ಗಳಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



