ಕಾರು ಮತ್ತು ಬಸ್ಸು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ಪಟ್ಟಣದ ಹೊರವಲಯದ ಕಡಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ.

ಪಾವಗಡ ಗ್ರಾಮದ ನಿವಾಸಿ ಚಂದ್ರಶೇಖರ್ ಮೃತ ಕಾರು ಚಾಲಕ. ಇಂದು ಮುಂಜಾನೆ ವೇಳೆ ಪಾವಗಡ ಪಟ್ಟಣದಿಂದ ಆಂಧ್ರದ ಪೆನುಕೊಂಡದ ಕಡೆಗೆ ಹೋಗುವ ರಸ್ತೆಯಲ್ಲಿ ಎದುರುಬದುರಾಗಿ ಬರುತ್ತಿದ್ದ ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ್ದು, ಕಾರು ನಜ್ಜುಗುಜ್ಜಾಗಿದೆ. ಕಾರು ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತಕ್ಷಣ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿದ್ದ ದಟ್ಟವಾದ ಮಂಜು ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಾವಗಡ ಪೊಲೀಸ್ ಠಾಣೆಯ ಸುರೇಶ್ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.



