ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ.

ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಹುದ್ದೆಗೆ ಸಂಪುಟ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜಕೀಯ ದತ್ತಾಂಶ ಮತ್ತು ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಮುಖ್ಯಸ್ಥರಾಗಿರುವ ಸುನೀಲ್ ಕನುಗೋಲು, ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ ಪರ ಚುನಾವಣಾ ತಂತ್ರ ರೂಪಿಸುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದರು. ಅದಕ್ಕೂ ಮುನ್ನ 2023ರಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ತಂತ್ರಗಾರಿಕೆಯಲ್ಲಿ ಮಾರ್ಗದರ್ಶನ ನೀಡಿದ್ದರು. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಕನುಗೋಲು ಅವರ ರಾಜಕೀಯ ವಿಶ್ಲೇಷಣೆ ಮತ್ತು ಚುನಾವಣಾ ತಂತ್ರಗಾರಿಕೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಸುನೀಲ್ ಕನುಗೋಲು ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲೂ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ರಾಜ್ಯ ಆಡಳಿತ ಮತ್ತು ರಾಜಕೀಯ ತಂತ್ರ ರೂಪಿಸುವಲ್ಲಿ ಅವರ ಪಾತ್ರ ಮತ್ತಷ್ಟು ಪ್ರಮುಖವಾಗುವ ನಿರೀಕ್ಷೆ ಇದೆ.



