ಮಂಗಳೂರು ನಗರದ ಬೆಂದೂರ್ನಲ್ಲಿರುವ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಮಾಹಿತಿ ಸಂಗ್ರಹಿಸಿ ದಾಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 35.53 ಗ್ರಾಂ ಎಂಡಿಎಂಎ ಮತ್ತು 7 ಸಾವಿರದ 30 ರೂಪಾಯಿ ನಗದು ಹಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಹಲಸೂರು ನಿವಾಸಿ ಮೊಹಮ್ಮದ್ ನದೀಂ, ಉಳ್ಳಾಲ ತಾಲೂಕು ಸೋಮೇಶ್ವರ ಉಚ್ಚಿಲದ ಪೆರಿಬೈಲ್ ನಿವಾಸಿ ಉಮರುಲ್ ಫಾರೂಕ್ ಮತ್ತು ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಕಿನ್ಯಾ ನಿವಾಸಿ ಇಮ್ಮಿಯಾಜ್ ಇಸ್ಮಾಯಿಲ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಮತ್ತು ಸೊತ್ತುಗಳನ್ನು ಮುಂದಿನ ತನಿಖೆಗಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಕದ್ರಿ ಪೊಲೀಸರು ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



