ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫರೂಖಾಬಾದ್ನಲ್ಲಿ 125 ವರ್ಷಗಳಷ್ಟು ಹಳೆಯದಾದ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಅನ್ನು ಧ್ವಂಸಗೊಳಿಸಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಈ ಕೃತ್ಯವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ. ಪಾಕಿಸ್ತಾನದ ಅಧಿಕಾರಿಗಳ ಪ್ರಕಾರ, ಜೂನ್ 24ರ ರಾತ್ರಿ ಸ್ಥಳೀಯ ಉದ್ಯಮಿಯೊಬ್ಬರು ಸಂಬಂಧಿತ ಇಲಾಖೆಯಿಂದ ಅಗತ್ಯ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯದೆ ಗುರುದ್ವಾರವನ್ನು ನೆಲಸಮಗೊಳಿಸಿದ್ದಾರೆ. ಈ ಘಟನೆಗೆ ಅಲ್ಪಸಂಖ್ಯಾತ ಸಿಖ್ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದೆ. ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಘಟನೆಯನ್ನು “ಅತ್ಯಂತ ಖಂಡನೀಯ ಹಾಗೂ ಉದ್ದೇಶಪೂರ್ವಕ ವಿಧ್ವಂಸಕ ಕೃತ್ಯ” ಎಂದು ಬಣ್ಣಿಸಿದ್ದಾರೆ.



