ಕಾಂಚನಾ ಟೆಕ್ಸ್ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಮುಖ ಪ್ರಕರಣಗಳಲ್ಲಿ ನ್ಯಾಯಾಲಯವು ಈತನ ವಿರುದ್ಧ ಈಗಾಗಲೇ ವಾರಂಟ್ ಹೊರಡಿಸಿತ್ತು. ಆರೋಪಿ ಸಾಹುಲ್ ಹಮೀದ್ ವಿರುದ್ಧ ಕಿಡ್ನಾಪ್, ಸುಲಿಗೆ, ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಹಾಗೂ ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 3, ಮಂಗಳೂರು ಗ್ರಾಮಾಂತರದಲ್ಲಿ 1, ಉತ್ತರ ಪೊಲೀಸ್ ಠಾಣೆಯಲ್ಲಿ 1 ಹಾಗೂ ಬರ್ಕೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಬರ್ಕೆ ಠಾಣೆಯಲ್ಲಿ ದಾಖಲಾದ ಐಪಿಸಿ 307 ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಶಾಹುಲ್ ಹಮೀದ್ ಜೈಲಿನಲ್ಲಿದ್ದ ಸಂದರ್ಭದಲ್ಲಿಯೇ ಶಶಿಕಿರಣ್ ಎಂಬಾತನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿದೆ. ಈ ಹಿಂದೆ ನರಸಿಂಹ ಶೆಟ್ಟಿಗಾರ್ ಹಾಗೂ ಪೊಳಲಿ ಅನಂತ ಮೂರ್ತಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಹೊಂದಿದ್ದರೂ, ಬಳಿಕ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.



