ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಅದರ ಹಿಂದಿನ ಜಾಲವನ್ನು ಭೇದಿಸಿದ್ದಾರೆ.

ಈ ಅಕ್ರಮ ವಲಸಿಗರನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರು ಪಶ್ಚಿಮ ಬಂಗಾಳ ಮೂಲದವರಾದ ಮೊಯಿದ್ದೀನ್ ಇಸ್ಲಾಂ , ದಿಲ್ವಾರ್ ಹುಸೇನ್, ರಸೂಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಇವರು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕೆಲಸಕ್ಕಾಗಿ ಕರೆತರುತ್ತಿದ್ದರು. ಇದೇ ನೆಪದಲ್ಲಿ ಭಾರತೀಯ ಕಾರ್ಮಿಕರ ಜೊತೆಯಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಸಹ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಮಂಗಳೂರಿಗೆ ಕರೆತಂದು ಕಟ್ಟಡ ನಿರ್ಮಾಣದ ಕೆಲಸಕ್ಕೆ ಸೇರಿಸುತ್ತಿದ್ದರು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ.



