ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಒಮಾನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕ ಅಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.

ಯುವಕ ಸುರಕ್ಷಿತರಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಮರಳುವ ನಿರೀಕ್ಷೆಯಲ್ಲಿ ಕುಟುಂಬದವರು ಕಾಯುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬಿಳಿಯೂರು ನಿವಾಸಿ ರಚನ್ ಅವರು ಕಳೆದ ಹಲವು ವರ್ಷಗಳಿಂದ ವಾಣಿಜ್ಯ ಹಡಗಿನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಅವರು ಕರ್ತವ್ಯದಲ್ಲಿದ್ದ ಹಡಗು ಒಮಾನ್ ಕರಾವಳಿ ಸಮೀಪ ಸಾಗುತ್ತಿದ್ದ ವೇಳೆ ದಾಳಿ ಸಂಭವಿಸಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಯುವಕ ಕುಟುಂಬ ಸದಸ್ಯರಿಗೆ ನೀಡಿದ ಮಾಹಿತಿಯ ಪ್ರಕಾರ, ಹಡಗು ತನ್ನ ಗಮ್ಯಸ್ಥಾನದತ್ತ ಸಾಗುತ್ತಿದ್ದ ವೇಳೆ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ಅದರ ಪರಿಣಾಮವಾಗಿ ಎಂಜಿನ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿ ಕ್ಷಣಾರ್ಧದಲ್ಲಿ ಗಂಭೀರ ಸ್ವರೂಪ ಪಡೆದ ಕಾರಣ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನೂ ತುರ್ತು ಕ್ರಮವಾಗಿ ಜೀವ ರಕ್ಷಕ ದೋಣಿಗಳ ಮೂಲಕ ಹಡಗಿನಿಂದ ಸ್ಥಳಾಂತರಿಸಲಾಯಿತು ಎಂದು ತಿಳಿದುಬಂದಿದೆ. ಹಡಗಿನಲ್ಲಿದ್ದ ಸಿಬ್ಬಂದಿ ತಕ್ಷಣವೇ ಸಂಬಂಧಿತ ಸಮುದ್ರ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬಳಿಕ ಒಮಾನ್ ನೌಕಾಪಡೆಯು ಸ್ಥಳಕ್ಕೆ ಆಗಮಿಸಿ ಎಲ್ಲರನ್ನು ಸುರಕ್ಷಿತವಾಗಿ ರಕ್ಷಿಸಿ ತನ್ನ ನೆಲೆಗೆ ಕರೆದೊಯ್ದಿದೆ. ಸದ್ಯ ಸಿಬ್ಬಂದಿ ಕಂಪನಿಯ ಮೇಲ್ವಿಚಾರಣೆಯಲ್ಲಿ ಸುರಕ್ಷಿತರಾಗಿದ್ದು, ಅಗತ್ಯ ವೈದ್ಯಕೀಯ ತಪಾಸಣೆ ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.



