ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ.

ಗದಗ ನಿವಾಸಿ ಶರಣಪ್ಪ ಗಂಭೀರ ಗಾಯಗೊಂಡವರು. ರಸ್ತೆ ಬದಿಯಲ್ಲಿ ನಿಂತಿದ್ದ ಶರಣಪ್ಪ ಅವರಿಗೆ ಕೇರಳ ನೋಂದಣಿಯ ಕಾರು ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಡಿಕ್ಕಿಯ ಪರಿಣಾಮ ಶರಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ತಲಪಾಡಿಯಲ್ಲಿ ಸರ್ವಿಸ್ ರಸ್ತೆ ಇಲ್ಲದಿರುವುದು ಒಂದೆಡೆಯಾದರೆ, ಮತ್ತೊಂದೆಡೆ ವಾಹನಗಳು ಹಾಗೂ ಲಾರಿಗಳನ್ನು ರಸ್ತೆಯಲ್ಲೇ ನಿಲ್ಲಿಸುತ್ತಿರುವುದರಿಂದ ಪಾದಚಾರಿಗಳಿಗೆ ಸಂಚರಿಸಲು ಸ್ಥಳಾವಕಾಶವಿಲ್ಲದಂತಾಗಿದೆ. ಇದರಿಂದ ಅಪಘಾತದ ಅಪಾಯ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಪಾದಚಾರಿಗಳ ಸುರಕ್ಷತೆ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



