ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.

ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿದ್ದಾನೆ. ಬಳಿಕ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ.

ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 2023ರ ಕಲಂ 309ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



