ಉಡುಪಿ: ಕಾಣೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರನ ಶವವು ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಕುಂಜಿಬೆಟ್ಟು ಎಂ.ಜಿ.ಎಂ ನಿವಾಸಿ ಕೆ.ಸುಂದರ್ (65) ಎಂದು ಗುರುತಿಸಲಾಗಿದೆ.

ಉಡುಪಿ ನಗರ ಪೊಲೀಸರ ಸಮಕ್ಷಮದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವವನ್ನು ಮೇಲಕ್ಕೆತ್ತಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಶವ ಸಾಗಿಸಲು ನೆರವಾದರು. ಸುಂದರ್ ಪತ್ನಿಯ ಜತೆ ವಾಸವಾಗಿದ್ದು, ಸೋಮವಾರದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.




