ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ,ಕಂಬಳವನ್ನು 24 ಗಂಟೆಯಲ್ಲಿ ಮುಕ್ತಾಯಗೊಳಿಸಲು ಹೊಸ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಬಳ ಹಾಗೂ ಶಿಸ್ತು ಸಮಿತಿ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.

ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಅಚ್ಚುಮೆಚ್ಚಿನ ಕಂಬಳವು ಹಿಂದಿನ ವರ್ಷಗಳಲ್ಲಿ ಒಂದಕ್ಕಿಂತ ಹೆಚ್ಚಿನ ದಿನ ನಡೆಯುವುದು ಸರ್ವೇಸಾಮಾನ್ಯ .ಈ ರೀತಿ ಕಂಬಳ ನಡೆದಾಗ ಆಯೋಜಕರಿಗೂ ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೂ ಸಾಕಷ್ಟು ಕಷ್ಟ ಆದ್ದರಿಂದ ಈ ಮೇಲಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ನವೆಂಬರ್ನಲ್ಲಿ ವರ್ಷದ ಕಂಬಳ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಏರ್ಪಡಿಸಿದ ಸಭೆಯಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಪ್ರಕಾರ ಶಿಸ್ತುಬದ್ಧವಾಗಿ ಕಂಬಳ ಆಯೋಜನೆ ಯಾವ ರೀತಿಯಲ್ಲಿ ಇರಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಯಿತು.ಕಂಬಳ ಮಂಜೊಟ್ಟಿಗೆ ಓಡಿಸುವವರು ಒಂದು ಬಾರಿ ಮಾತ್ರ ಕೋಣದ ಮೇಲೆ ಮೆಲ್ಲನೆ ಹೊಡೆಯಬಹುದು. ಒಂದು ಕಂಬಳದಲ್ಲಿ ಕೋಣಗಳಿಗೆ ಹೆಚ್ಚು ಬಾರಿ ಹೊಡೆದರೆ ಓಡಿಸುವವರಿಗೆ ಒಂದು ಬಾರಿ ಎಚ್ಚರಿಕೆ ನೀಡುವುದು ಹಾಗೂ ಅದರ ಮಾಲೀಕರಿಗೆ ಮಾಹಿತಿ ನೀಡುವುದು. ಎಚ್ಚರಿಕೆ ನೀಡಿದ ಬಳಿಕವೂ ಮುಂದಿನ ಕಂಬಳದಲ್ಲಿ ತಪ್ಪು ಪುನರಾವರ್ತಿಸುವ ಕಂಬಳದ ಓಟಗಾರನಿಗೆ ರೂಪಾಯಿ 5,000 ದಂಡ ವಿಧಿಸುವುದು. ಮೂರನೇ ಬಾರಿ ನಿಯಮ ಉಲ್ಲಂಘಿಸುವ ಓಟಗಾರನಿಗೆ ಮುಂದಿನ 1 ಕಂಬಳದಲ್ಲಿ ಅವಕಾಶ ನಿರಾಕರಣೆ ಶಿಕ್ಷೆ ನೀಡಲು ಸಭೆ ತೀರ್ಮಾನಿಸಿತು.



