ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತವಾದ ಕ್ರಾಂತಿ ಮಾಡಿರುವ ಬಂಟ ಸಮುದಾಯ, ಸಮಾಜಕ್ಕೆ ಹಲವು ಕೊಡುಗೆಗಳನ್ನು ನೀಡಿದೆ. ದೇಶದ ರಕ್ಷಣೆ, ಅಭಿವೃದ್ಧಿ ಸಮಾಜದಲ್ಲಿ ಸ್ವಾಸ್ಯ ಕಾಪಾಡುವಲ್ಲಿ ಈ ಸಮುದಾಯದ ಕೊಡುಗೆ ಅಪಾರ ಎಂದು ಕೇಂದ್ರ ಕೃಷಿ ಮತ್ತು ರೈತರ ಅಭಿವೃದ್ಧಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವ ಬಂಟರ ಸಮ್ಮೇಳನ ಪ್ರಯುಕ್ತ ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದ ತೆರೆದ ಮೈದಾನದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬಂಟರು ಇಡೀ ಸಮಾಜದ ನೇತೃತ್ವ ವಹಿಸುವ ಸಮುದಾಯವಾಗಿದೆ. ಭೂತಸ್ಥಾನ, ನಾಗ, ದೇವಸ್ಥಾನ, ಗರಡಿಯಲ್ಲಿ ನಡೆಯುವ ಯಾವುದೇ ಕಾರ್ಯಗಳ ನೇತೃತ್ವವನ್ನು ಬಂಟ ಸಮುದಾಯ ವಹಿಸಿದರೆ ಅದು ಅಚ್ಚುಕಟ್ಟಾಗಿ ಇರುತ್ತದೆ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕವಾಗಿ ನೇತೃತ್ವ ವಹಿಸುವ ಗಟ್ಟಿ ಸಮುದಾಯ ಆಗಿದೆ. ಶಿಕ್ಷಿತ ಹಾಗೂ ಸುಸಂಸ್ಕೃತ ಸಮುದಾಯದವರಾಗಿರುವ ಬಂಟರು, ತಮ್ಮ ಸಂಸ್ಕೃತಿ ಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ವೇದಿಕೆಯಲ್ಲಿ ಅಭಿನಂದಿಸಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ ಉಪಸ್ಥಿತರಿದ್ದರು.
ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕತಿಕ ಕಲಾ ಬೈಭವದ ತೀರ್ಪುಗಾರರಾಗಿ ಕಾಂತಾರ ಖ್ಯಾತಿಯ ನಟಿ ಮಾನಸಿ ಸುಧೀರ್, ನೃತ್ಯ ಕಲಾವಿದೆ ಪ್ರಥಮ ಪ್ರಸಾದ್ ರಾವ್, ಧಾರವಾಹಿ ನಟ ದಿಲೀಪ್ ಶೆಟ್ಟಿ ಇದ್ದರು.



