ಅಕ್ರಮವಾಗಿ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ವಶದಲ್ಲಿರಿಸಿಕೊಂಡು ಯಾವುದೋ ದುಷ್ಕೃತ್ಯವನ್ನು ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ
ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಅಸ್ಕರ್(26),
ಮತ್ತು ಅಬ್ದುಲ್ ನಿಸಾರ್.ಕೆ(29),
ಎಂಬವರನ್ನು ಬಂಧಿಸಿ ಅವರಿಂದ ಪಿಸ್ತೂಲ್-1, ಸಜೀವ ಮದ್ದುಗುಂಡುಗಳು-2, ಮೊಬೈಲ್ ಫೋನುಗಳು-2, ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಸೇರಿ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಶ್ರೀ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.



