ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿಯನ್ನು ಹತ್ಯೆ ಮಾಡಲಾಗಿದೆ. ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಕಳೆದ ಬುಧವಾರ ನಾಪತ್ತೆಯಾಗಿದ್ದಾರೆ. ರಾಯಬಾಗ ತಾಲೂಕಿನ ಕಟಕಬಾವಿ ಕುಗ್ರಾಮದಲ್ಲಿ ಆಚಾರ್ಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿಯ ಎಸ್ಪಿ ಸಂಜೀವ್ ಪಾಟೀಲ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಭಕ್ತರು ಶುಕ್ರವಾರ ದೂರು ನೀಡಿದ್ದರು. ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೆವು. ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತನಿಖೆ ನಡೆಸಿದೆವು. ತನಿಖೆಯ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರೆಂಬುದರ ಬಗ್ಗೆ ವಿಚಾರಣೆ ನಡೆಸಲಾಯಿತು.
ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿಯನ್ನು ವಿಚಾರಣೆ ಮಾಡಿದೆವು. ಆ ವ್ಯಕ್ತಿ ಆಶ್ರಮದಲ್ಲಿ ಮಹಾರಾಜರನ್ನು ಕೊಲೆ ಮಾಡಿ ಬೇರೆಡೆ ಶವ ಬಿಸಾಕಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಓರ್ವನನ್ನು ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಸ್ವಾಮೀಜಿ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ಶ್ರೀ ಕುಮಾರ್ ನಂದಿ ಮಹಾರಾಜರು ಕಳೆದ 15 ವರ್ಷಗಳಿಂದ ನಂದಿ ಪರ್ವತದಲ್ಲಿ ವಾಸವಾಗಿದ್ದರು. ಕಳೆದ ಬುಧವಾರ ಜೈನಮುನಿಗಳು ತಾವು ವಾಸವಿದ್ದ ಕೋಣೆಯಲ್ಲಿ ಪಿಂಚಿ, ಕಮಂಡಲ ಹಾಗೂ ಮೊಬೈಲನ್ನು ಬಿಟ್ಟು ಕಾಣೆಯಾಗಿದ್ದರು. ಸಾಮಾನ್ಯವಾಗಿ ಜೈನಮುನಿಗಳು ಎಲ್ಲೇ ಹೋಗಬೇಕಾದರೂ ಪಿಂಚಿ, ಕಮಂಡಲ ತಗೆದುಕೊಂಡು ಹೋಗುವ ಪದ್ಧತಿ ಇದೆ. ಆದರೆ ಜೈನ ಮುನಿ ನಾಪತ್ತೆಯಾದ ದಿನ ಇವುಗಳು ಆಶ್ರಮದಲ್ಲೇ ಇದ್ದುದರಿಂದ ಭಕ್ತರ ಆತಂಕಕ್ಕೆ ಕಾರಣವಾಗಿತ್ತು.



