ಬಂಟ್ವಾಳ : ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ( ರಿ.) ವತಿಯಿಂದ ರಾಯಿ,ಕೊಯಿಲ ಮತ್ತು ಅರಳ ಮೂರು ಗ್ರಾಮಗಳಿಗೆ ಸಂಬಂಧಿಸಿದಂತೆ ನೂತನವಾಗಿ ನಿರ್ಮಾಣವಾದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಜ್ಞಾನ ಮಂದಿರದಲ್ಲಿ ಗುರುಗಳ ವಿಗ್ರಹ ಪ್ರತಿಷ್ಠಾಪನೆ ಮತ್ತು ಸಮುದಾಯ ಭವನ ಲೋಕಾರ್ಪಣೆ ಕಾರ್ಯಕ್ರಮ ಮೇ.11 ರಂದು ನಡೆಯಲಿದ್ದು,ಮೇ.9 ಮತ್ತು 10 ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ ಎಂದು ಗೌರವಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು . ವಾಸ್ತು ಶಿಲ್ಪಿ ಶ್ರೀ ಪ್ರಮಲ್ಲ್ ಕುಮಾರ್ ಕಾರ್ಕಳ ಇವರ ವಾಸ್ತು ಶಿಲ್ಪದಂತೆ ಶ್ರೀ ಸದಾನಂದ ಶಾಸ್ತ್ರಿ ವೇಣೂರು ಇವರ ಪೌರೋಹಿತ್ಯದಲ್ಲಿ ಶ್ರೀ ಲಕ್ಮಣ ಶಾಂತಿ ಕುದ್ರೋಳಿ ಇವರ ಉಪಸ್ಥಿತಿಯಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿದೆ.ಮೇ. 9 ರಂದು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಬಳಿಯಿಂದ ಗುರುಗಳ ಮೂರ್ತಿಯ ಮೆರವಣಿಗೆ ಹಾಗೂ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಮೇ. 10 ರಂದು ಶನಿವಾರ ಋತಿಜ್ವರ ಆಗಮನ ,ಭಜನಾ ಸಂಕೀರ್ತನೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ.
ಮೇ. 11 ರಂದು ಗುರುಗಳ ಮೂರ್ತಿಯ ಪ್ರತಿಷ್ಠೆ ,ನಾರಾಯಣ ಗುರು ಚಿಂತನಾ ಸಮಾವೇಶ , ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.
ನೂತನ ಜ್ಞಾನ ಮಂದಿರವನ್ನು ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಲೋಕಾರ್ಪಣೆ ಮಾಡಲಿದ್ದಾರೆ.ಉದ್ಯಮಿ ಬಿ.ಪ್ರಕಾಶ್ ಶೆಟ್ಟಿ ಸಮುದಾಯ ಭವನ ಲೋಕಾರ್ಪಣೆ, ಅನ್ನಛತ್ರದ ಉದ್ಘಾಟನೆಯನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಭಾ ವೇದಿಕೆಯನ್ನು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಡಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಭಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು,ಶಾಸಕರುಗಳು, ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು, ಉದ್ಯಮಿಗಳು ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕಳೆದ 31 ವರ್ಷಗಳ ಹಿಂದೆ ಸ್ಥಾಪನೆಯಾದ ಸಂಘ ಇದೀಗ ಎತ್ತರಕ್ಕೆ ಬೆಳೆದು ನಿಂತಿರುವ ಸುಸಂದರ್ಭದಲ್ಲಿ ಅತ್ಯಂತ ಸುಂದರವಾಗಿ ನಿರ್ಮಾಣವಾದ ಜ್ಞಾನ ಮಂದಿರದಲ್ಲಿ ಗುರುಗಳ ವಿಗ್ರಹ ಪ್ರತಿಷ್ಠಾಪನೆ ಆಗಲಿದೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯತೆಯನ್ನು ಕ್ರೋಡೀಕರಿಸುವ ನಿಟ್ಟಿನಲ್ಲಿ ವೈಶಿಷ್ಟ್ಯ ಪೂರ್ಣವಾದ ಕಾರ್ಯಕ್ರಮವಾಗಿ ಮೂಡಿಬರಲಿದೆ.ಜಾತಿಯ ಸಮಾವೇಶವಾಗದ ದೇಶದ ಚಿಂತನೆಯುಳ್ಳ ಕಾರ್ಯಕ್ರಮವಾಗಬೇಕು ಈ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಢಾ ಮಹೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಜೆ.ಎಸ್.ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆಗುತ್ತು, ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಸಂಘಟನಾ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು.



