ಸೆಕ್ಯೂರಿಟಿ ಕೆಲಸ ಮುಗಿಸಿ ಕಂಪೆನಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೋರ್ವರಿಗೆ ಹಿಂಬದಿಯಿ0ದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿ ಎಂಬಲ್ಲಿ ನಡೆದಿದೆ.

ತಮಿಳುನಾಡು ಮೂಲದ ಸುರರಾಮ್ ಬುಗ್ಗಪ್ಪ (50) ಮೃತಪಟ್ಟ ವ್ಯಕ್ತಿ. ಇವರು ಕೆ.ಎನ್.ಆರ್.ಸಿ.ಕಂಪೆನಿಯ ಸೆಕ್ಯುರಿಟಿ ಕಾರ್ಮಿಕನಾಗಿದ್ದು, ರಸ್ತೆಯ ಬದಿಯಲ್ಲಿ ಕಾಮಗಾರಿ ಹಿನ್ನಲೆಯಲ್ಲಿ ದಾಸ್ತಾನು ಮಾಡಲಾಗಿರುವ ಕಚ್ಚಾ ವಸ್ತುಗಳನ್ನು ಕಾಯುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಬೆಳಿಗ್ಗೆ ಕಂಪೆನಿ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಮಸೀದಿ ಎದುರಿನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಿಂಬದಿಯಿ0ದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದ. ಗಾಯಗೊಂಡ ಕಾರ್ಮಿಕನನ್ನು ಕೂಡಲೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಸುರರಾಮ್ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಪರಾರಿಯಾಗಿದ್ದ ಎಸ್.ಆರ್.ಎಸ್. ಕಂಪೆನಿಗೆ ಸೇರಿದ ಬಸ್ ನ್ನು ಬಂಟ್ವಾಳ ಟ್ರಾಫಿಕ್ ಪೋಲೀಸರು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಠಾಣೆಗೆ ತಂದುನಿಲ್ಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



