ಪುದುಚೇರಿಯಲ್ಲಿ 12 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕೆಮ್ಮು ಮತ್ತು ಶೀತದ ಲಕ್ಷಣಗಳನ್ನು ಹೊಂದಿರುವವರನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಪುದುಚೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ವಿ. ರವಿಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಕಳೆದೊಂದು ವಾರದಿಂದ 12 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ . ಸಾರ್ವಜನಿಕರು ಆತಂಕಕ್ಕೆ ಒಳಗಾಗ ಬೇಕಿಲ್ಲ. ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಆರೋಗ್ಯ ಇಲಾಖೆ ಸಂಪೂರ್ಣವಾಗಿ ಸಿದ್ಧವಾಗಿದೆ. ಸರ್ಕಾರಿ ಜನರಲ್ ಆಸ್ಪತ್ರೆ, ಕದಿರ್ಕಾಮಮ್ನಲ್ಲಿರುವ ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ 19 ರೋಗಿಗಳಿಗೆ ನಾಲ್ಕು ಹಾಸಿಗೆಗಳನ್ನು ಮೀಸಲಿಡಲಾಗಿದೆ . ಗೋರಿಮೇಡುವಿನ ಸರ್ಕಾರಿ ಹೃದ್ರೋಗ ಆಸ್ಪತ್ರೆಯಲ್ಲಿ ವೆಂಟಲೇಟರ್ ಆಧಾರಿತ ಆರು ಹಾಸಿಗೆಗಳ ವಾರ್ಡ್ ಅನ್ನು ಕಾಯ್ದಿರಿಸಲಾಗಿದೆ. ಆರೋಗ್ಯ ಇಲಾಖೆಯು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಮತ್ತು ದೆಹಲಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ರವಿಚಂದ್ರನ್ ತಿಳಿಸಿದ್ದಾರೆ.



