ಆಪರೇಷನ್ ಸಿಂದೂರದ ಬಳಿಕ ಪ್ರಧಾನಿ ಮೋದಿ ಗುರುವಾರ ರಾಜಸ್ಥಾನದ ಬಿಕಾನೇರ್ನಲ್ಲಿರುವ ನಲ್ ವಾಯುನೆಲೆಗೆ ಭೇಟಿ ನೀಡಿದ್ದಾರೆ. ರಾಜಸ್ಥಾನದಲ್ಲಿ ಇಂದು ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು 22 ನಿಮಿಷಗಳಲ್ಲಿ ಸೇಡು ತೀರಿಸಿಕೊಂಡಿದೆ ಎಂದು ಹೇಳಿದ್ದಾರೆ. ನಮ್ಮ ನೆಲದ ಮೇಲೆ ದಾಳಿ ನಡೆಸಿದವರನ್ನು ಅವರ ನೆಲದಲ್ಲಿಯೇ ಹೂತು ಹಾಕಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಏಪ್ರಿಲ್ 22 ರ ದಾಳಿಗೆ ಪ್ರತಿಕ್ರಿಯೆಯಾಗಿ, ನಾವು ಭಯೋತ್ಪಾದಕರ ಒಂಬತ್ತು ದೊಡ್ಡ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನಾಶಪಡಿಸಿದ್ದೇವೆ. ಸಿಂದೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಎಂಬುದನ್ನು ಶತ್ರು ರಾಷ್ಟ್ರಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ರಕ್ತವಲ್ಲ, ನನ್ನ ರಕ್ತನಾಳಗಳಲ್ಲಿಯೂ ಸಿಂದೂರ ಕುದಿಯುತ್ತಿದೆ ಎಂದು ಅವರು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡಲು ಭಾರತ ಒಗ್ಗಟ್ಟಾಗಿದೆ. ನಾವು ಭಯೋತ್ಪಾದನೆಯ ವಿರುದ್ಧ ಸಮರ ಸಾರಿದ್ದೇವೆ. ಸರ್ಕಾರವು ಮಿಲಿಟರಿಗೆ ಮುಕ್ತ ಹಸ್ತ ನೀಡಿತು ಮತ್ತು ಸಶಸ್ತ್ರ ಪಡೆಗಳು ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದವು ಎಂದು ಪ್ರಧಾನಿ ಮಾತನಾಡಿದ್ದಾರೆ.
“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು, ಇಂದು ಮಣ್ಣಾಗಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಚರಣೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ)ದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.



