ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.
ಕರಿಬಸಪ್ಪ ಮತ್ತು ಮಗಳು ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ನಡುರಾತ್ರಿ ಕುಮಾರ್ ಎಂಬ ಆರೋಪಿ ಮನೆಗೆ ನುಗ್ಗಿ ಕತ್ತಿಯಿಂದ ಕರಿಬಸಪ್ಪನಿಗೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಎಚ್ಚರಗೊಂಡ ಮಗಳು ಜೋರಾಗಿ ಕಿರುಚಿಕೊಂಡಿದ್ದಾಳೆ. ಇದರಿಂದ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಹಲ್ಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ವಿಚಾರವನ್ನು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ತಿಳಿಸಿದ್ದು ಬಳಿಕ ಬಂದ ಅವರು ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ಕರಿಬಸಪ್ಪ ಪ್ರಾಣಪಾಯದಿಂದ ಪಾರಾಗಿದ್ದಾರೆ. ಪೆಟ್ಟು ಸ್ವಲ್ಪ ಕೆಳಗೆ ಬಿದ್ದಿದ್ದರೆ ವ್ಯಕ್ತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಕೂಡಲೇ ವಿಶು ಶೆಟ್ಟಿ ತನ್ನ ವಾಹನದಲ್ಲಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ವೆಸ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮುಖಾಂತರ ಕಳುಹಿಸಿದ್ದಾರೆ.ಪ್ರಕರಣದ ಬಗ್ಗೆ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿ ಕುಮಾರನನ್ನು ಬಂಧಿಸಿ, ಹಲ್ಲೆ ಮಾಡಿದ ಕತ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.