ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಪುತ್ತೂರಿನ ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.10ಕ್ಕೆ ಮುಂದೂಡಿಕೆಯಾಗಿದೆ.
ಯುವತಿಗೆ ವಂಚನೆ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿರುವ ಆರೋಪಿ ಶ್ರೀಕೃಷ್ಣ ಜೆ. ರಾವ್ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.3ರಂದು ನಡೆದಿತ್ತು. ಸಂತ್ರಸ್ತ ಯುವತಿಯ ಪರವಾಗಿ ಆಕೆಯ ತಾಯಿ ನಮಿತಾರವರು ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಹಾಜರಾದ್ರು. ಸಂತ್ರಸ್ತೆಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿತ್ತು. ಆದರೆ, ಆಕೆ ಮೂರು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆಯ ತಾಯಿ ನ್ಯಾಯಾಧೀಶರಿಗೆ ತಿಳಿಸಿದರಲ್ಲದೆ, ಆರೋಪಿಗೆ ನಿರೀಕ್ಷಣಾ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯ ತಾಯಿಯ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಸರಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದ್ರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಜು. 10ಕ್ಕೆ ಮುಂದೂಡಿದೆ.



