ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಅವರ ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದ್ದಾರೆ.

ಮನೆಯ ಬಳಿಯ ಶೆಡ್ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದು, ದಾಳಿ ಸಮಯ ಇಬ್ಬರು ಪರಾರಿಯಾಗಿರುತ್ತಾರೆ. ಒರ್ವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಮೈಯದಿ ಎಂಬಾತನಾಗಿದ್ದು, ಶೆಡ್ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಂಡಿದ್ದಾರೆ. ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೇಡ್ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಾನ್ಯ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ.



