ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಮಂಜೇಶ್ವರ ತಾಲೂಕು ಉಪ್ಪಳದ 48 ವರ್ಷದ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಬಂಧಿತ ಆರೋಪಿ. ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 19 ಪ್ರಕರಣಗಳು ಮತ್ತು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿವೆ. ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿತ್ತು. ಕೊಣಾಜೆ ಠಾಣೆಯ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಮಂಜೇಶ್ವರ ಪೊಲೀಸ್ ಠಾಣಾ ಒಂದು ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಬಂಧಿತ ಆರೋಪಿ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಅಂತಾರಾಜ್ಯ ನಟೋರಿಯಸ್ ಕ್ರಿಮಿನಲ್ ಆಗಿದ್ದು, ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ ಯಾನೆ ಜಿಯಾ ಎಂಬಾತನ ಸಹಚರ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆರೋಪಿಯನ್ನು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ. ಕೆ. ಮಾರ್ಗದರ್ಶನದಲ್ಲಿ ಎಎಸ್ಐ ಚಂದ್ರಶೇಖರ್, ಸಿಬ್ಬಂದಿ ರೆಜಿ ವಿ.ಎಂ, ದಾಮೋದರ.ಕೆ ಮತ್ತು ಹಾಲೇಶ್ ನಾಯ್ಕ್ ನೇತೃತ್ವದ ಪೊಲೀಸರ ತಂಡ ಡಿಸೆಂಬರ್ 16ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿದ್ದಾರೆ.



