ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಂಗಳೂರು ನಗರದ ಕದ್ರಿ ವ್ಯಾಸನಗರದಲ್ಲಿ ಈ ಘಟನೆ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಒಂದು ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯದಲ್ಲಿದ್ದ ಇವರು ಇತ್ತೀಚೆಗೆ ಪಾಂಡೇಶ್ವರ ಠಾಣೆಗೆ ಬಂದಿದ್ದರು.

ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ ನೆಲೆಸಿದ್ದರು. ಪತ್ನಿ ಮತ್ತು ಮಕ್ಕಳು ರಜೆಯ ಕಾರಣ ಊರಿಗೆ ತೆರಳಿದ್ದರು. ಆದಿತ್ಯವಾರ ಬೆಳಗ್ಗೆ ಸಹಜವಾಗಿಯೇ ಇದ್ದ ಹರಿಶ್ಚಂದ್ರ ಅವರು ದೇವರಿಗೆ ಹೂ ಇಡಲು ಹೊರಗಿನಿಂದ ಹೂ ಕೊಯ್ಯುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದರೆ. ಬೆಳಗ್ಗೆ 10.30ರ ವೇಳೆಗೆ ಹಠಾತ್ ಮನೆಯ ಹೊರಗೆ ಎದುರು ಭಾಗದಲ್ಲಿ ಬೆಂಕಿ ಹತ್ತಿಕೊಂಡು ಬಳಿಕ ಬೊಬ್ಬೆ ಕೇಳಿದ್ದು ಪಕ್ಕದ ಮನೆಯವರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೈಯಲ್ಲಿದ್ದ ಅಂಗಿ ಸಹಿತ ಮೈ ಪೂರ್ತಿ ಸುಟ್ಟು ಹೋಗಿದೆ. ಕೂಡಲೇ ಮಾಹಿತಿ ಪಡೆದು ಕದ್ರಿ ಪೊಲೀಸರು ಮತ್ತು ಆಂಬುಲೆನ್ಸ್ ಬಂದಿದ್ದು ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ.



