ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ತಮ್ಮ ಮೊದಲ ಆದೇಶದಲ್ಲೇ ರಾಜ್ಯದ ಶಾಲಾ-ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳ ಸಮೀಪ ಕಾರ್ಯನಿರ್ವಹಿಸುತ್ತಿರುವ 717 ಸರ್ಕಾರಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗಿನ ಮದ್ಯದಂಗಡಿಗಳನ್ನು ಮುಂದಿನ ಎರಡು ವಾರಗಳೊಳಗೆ ತೆರವುಗೊಳಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಒಟ್ಟು 4,765 ಸರಕಾರಿ ಮದ್ಯದಂಗಡಿಗಳ ಪೈಕಿ 717 ಅಂಗಡಿಗಳಿಗೆ ಈ ಆದೇಶದಿಂದ ಬೀಗ ಬೀಳಲಿದ್ದು, ಸರ್ಕಾರದ ಈ ಕ್ರಮ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮದ್ಯದಂಗಡಿಗಳ ಬಂದ್ ಕ್ರಮದ ಜೊತೆಗೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಹಲವು ಪ್ರಮುಖ ಭರವಸೆಗಳ ಜಾರಿಗೂ ಸಿಎಂ ವಿಜಯ್ ಚಾಲನೆ ನೀಡಿದ್ದಾರೆ. ಗೃಹ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಪಡೆ ರಚನೆಗೆ ಆದೇಶ ಹೊರಡಿಸಲಾಗಿದೆ. ಜೊತೆಗೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಡ್ರಗ್ಸ್ ವಿರೋಧಿ ವಿಶೇಷ ಘಟಕ ಸ್ಥಾಪನೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಟಿವಿಕೆ ಪಕ್ಷದ ಮೂಲಕ ರಾಜ್ಯದ ಅತಿದೊಡ್ಡ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿರುವ 51 ವರ್ಷದ ವಿಜಯ್, ಕಾಂಗ್ರೆಸ್, ಎಡಪಕ್ಷಗಳು, ವಿಸಿಕೆ ಹಾಗೂ ಮುಸ್ಲಿಂ ಲೀಗ್ ಬೆಂಬಲದೊ0ದಿಗೆ ತಮಿಳುನಾಡಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರ ರಚಿಸಿರುವುದು ವಿಶೇಷವಾಗಿದೆ.



