ವೈಭವೀಕರಣವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಣ ಮಾಡಲಾಗಿರುವ ಸುದ್ದಿಗಳನ್ನು ನಾನು ಹಿಂದೆ ಗಮನಿಸಿದ್ದೆ. ಆದರೆ ಇಂದು ಫ್ಯಾಕ್ಟ್ ಚೆಕ್ ಮಾದರಿಯಲ್ಲಿ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಇದು ಸಂತಸದ ವಿಚಾರ. ಪತ್ರಕರ್ತರು ನೈಜ ಸುದ್ದಿಗಳನ್ನು ನೈಜವಾಗಿ ನೀಡಬೇಕು. ಸಮಾಜದಲ್ಲಿ ವಸ್ತು ನಿಷ್ಠರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಮಾರಂಭದ ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



