ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಮನೆ ಮನೆಗಳಿಂದ ಸಂಗ್ರಹವಾಗುವ ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ರಸ್ತೆ ಬದಿ ಹಾಗೂ ನದಿ ತೀರದಲ್ಲಿ ರಾಶಿ ಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಂಚಿನಡ್ಕದಲ್ಲಿರುವ ಡಂಪಿಂಗ್ ಯಾರ್ಡ್ಗೆ ಸಾಗಿಸಬೇಕಾದ ತ್ಯಾಜ್ಯವನ್ನು ನೇತ್ರಾವತಿ ಸೇತುವೆ ಕೆಳಭಾಗದ ಕಂಚಿಕಾರ್ ಪೇಟೆ ರಸ್ತೆ ಸಮೀಪ ರಾಶಿ ಹಾಕಲಾಗಿದ್ದು, ಕೊಳೆತ ತ್ಯಾಜ್ಯದಿಂದ ದುರ್ವಾಸನೆ ವ್ಯಾಪಿಸಿದೆ. ಮಳೆಗಾಲದಲ್ಲಿ ಈ ತ್ಯಾಜ್ಯದಿಂದ ಹೊರಬರುವ ಕೊಳಕು ನೀರು ನೇರವಾಗಿ ನೇತ್ರಾವತಿ ನದಿಗೆ ಸೇರುತ್ತಿದ್ದು, ಪರಿಸರ ಮಾಲಿನ್ಯದ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಅಪಾಯ ಉಂಟುಮಾಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ನೇತ್ರಾವತಿ ನದಿಯ ನೀರನ್ನೇ ಶುದ್ಧೀಕರಿಸಿ ಮಂಗಳೂರು ಮಹಾನಗರ ಸೇರಿದಂತೆ ಸಾವಿರಾರು ಜನರಿಗೆ ಕುಡಿಯುವ ನೀರಾಗಿ ಪೂರೈಕೆ ಮಾಡಲಾಗುತ್ತದೆ. ಇಂತಹ ಮಹತ್ವದ ನದಿಗೆ ತ್ಯಾಜ್ಯ ಮಿಶ್ರಿತ ನೀರು ಸೇರುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಂಟ್ವಾಳ ಪುರಸಭೆಯ ಮನೆ ಮನೆಯ ಕಸ ಸಂಗ್ರಹ ಸೇವೆಯೂ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಸ ಸಂಗ್ರಹಕ್ಕೆ ಬಳಸುವ ಸುಮಾರು ಹತ್ತು ವಾಹನಗಳ ಪೈಕಿ ಏಳು ವಾಹನಗಳು ದುರಸ್ತಿಯಲ್ಲಿದ್ದು, ಕೇವಲ ಮೂರು ವಾಹನಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ. ಇದರಿಂದ ಹಲವಾರು ವಾರ್ಡ್ಗಳಲ್ಲಿ ದಿನಗಳ ಕಾಲ ಕಸ ಸಂಗ್ರಹವಾಗದೆ ರಸ್ತೆ ಬದಿಯಲ್ಲೇ ರಾಶಿಯಾಗುತ್ತಿದ್ದು, ದುರ್ವಾಸನೆ ಹಾಗೂ ಸೊಳ್ಳೆ-ನೊಣಗಳ ಕಾಟ ಹೆಚ್ಚಾಗಿದೆ. ಮಳೆಗಾಲದಲ್ಲಿ ಕೊಳೆತ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಪರಿಸ್ಥಿತಿ ಹದಗೆಡುತ್ತಿದ್ದರೂ ಪುರಸಭೆ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಕುರಿತು ಸಾಮಾಜಿಕ ಹೋರಾಟಗಾರ ಗೋವಿಂದ ಪ್ರಭು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಕಳೆದ ಹಲವು ದಿನಗಳಿಂದ ತ್ಯಾಜ್ಯ ನಿರ್ವಹಣೆ ಸಂಪೂರ್ಣ ವಿಫಲವಾಗಿದೆ. ರಸ್ತೆ ಬದಿಯಲ್ಲಿ ಕೊಳೆತ ಕಸದ ರಾಶಿ ಬಿದ್ದಿದ್ದು, ಅದರಿಂದ ಹೊರಬರುವ ಕೊಳಕು ನೀರು ನೇತ್ರಾವತಿ ನದಿಗೆ ಸೇರುತ್ತಿದೆ. ಇದು ಪರಿಸರಕ್ಕೂ ಸಾರ್ವಜನಿಕ ಆರೋಗ್ಯಕ್ಕೂ ದೊಡ್ಡ ಅಪಾಯ. ಆರೋಗ್ಯ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಇಂತಹ ದುಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. ಸ್ಥಳೀಯರ ಆರೋಪದಂತೆ, ಸಮಸ್ಯೆ ಬಗ್ಗೆ ಹಲವು ಬಾರಿ ಗಮನ ಸೆಳೆದಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿಲ್ಲ. ವಾಹನಗಳ ದುರಸ್ತಿ, ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಹಾಗೂ ಸ್ವಚ್ಛತಾ ವ್ಯವಸ್ಥೆ ಸುಧಾರಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವೇ ಇಂದಿನ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ತಕ್ಷಣವೇ ನದಿ ತೀರದಲ್ಲಿ ರಾಶಿಯಾಗಿರುವ ತ್ಯಾಜ್ಯವನ್ನು ತೆರವುಗೊಳಿಸಿ, ಮನೆ ಮನೆ ಕಸ ಸಂಗ್ರಹ ವ್ಯವಸ್ಥೆಯನ್ನು ಸುಗಮಗೊಳಿಸುವ ಜೊತೆಗೆ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕವಾಗಿ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ನಾಗರಿಕರು ಎಚ್ಚರಿಕೆ ನೀಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…