ಕರಂಬಾರು ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ (ರಿ.), ಶಾಲಾ ಅಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆದಿದೆ.

ಆಟಿಡೊಂಜಿ ದಿನ’ ಕಾರ್ಯಕ್ರಮಕ್ಕೆ ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು ಆಟಿ ತಿಂಗಳಲ್ಲಿ ಪ್ರಕೃತಿಯಲ್ಲಿ ಹಲವು ಬದಲಾವಣೆಗಳಾಗುತ್ತವೆ. ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಮ್ಮ ಹಿರಿಯರು ನಲಿಕೆ, ತಜಂಕ್, ಪತ್ರೊಡೆ, ಗೇರುಸೊಪ್ಪು, ಮತ್ತು ವಿವಿಧ ಕಾಡಿನ ಗೆಡ್ಡೆ-ಗೆಣಸುಗಳನ್ನು ಬಳಸಿ ವಿಶೇಷ ಅಡುಗೆಗಳನ್ನು ತಯಾರಿಸುತ್ತಿದ್ದರು.

ಆಟಿ ಕೂಟದ ಮೂಲಕ ಇಂದಿನ ಯುವ ಪೀಳಿಗೆಗೆ ಈ ಆರೋಗ್ಯಕರ ಊಟದ ರುಚಿ ಮತ್ತು ಮಹತ್ವವನ್ನು ಪರಿಚಯಿಸಲಾಗುತ್ತದೆ ಎಂದು ಹೇಳಿದ್ದಾರೆ. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ, ಶ್ರೀ ಮರಿಯಮ್ಮ ಕೋಟಿ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಜಗನ್ನಾಥ್ ಸಾಲ್ಯಾನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



