ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ರೈತರ ಜಮೀನಿನಲ್ಲಿ ದಬ್ಬಾಳಿಕೆ ನಡೆಸುವುದು, ಸೂಕ್ತ ಪರಿಹಾರ ನೀಡದೆ ವಿಂಡ್ ಟರ್ಬೈನ್ ರೆಕ್ಕೆಗಳನ್ನು ಸಾಗಿಸುವುದು ಹಾಗೂ ರಸ್ತೆ ನಿರ್ಮಾಣದ ಹೆಸರಿನಲ್ಲಿ ಮರ-ಗಿಡಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ವಿಂಡ್ ಮಿಲ್ ಕಂಪನಿ ಸಿಬ್ಬಂದಿ ರೈತರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. “ನಿನ್ನ ಜಮೀನಿದ್ರೆ ಮಾತಾಡು, ಇಲ್ಲದಿದ್ದರೆ ಇಲ್ಲಿಂದ ಹೋಗು” ಎಂಬ ರೀತಿಯ ಬೆದರಿಕೆ ಮಾತುಗಳಿರುವ ವಿಡಿಯೊಗಳನ್ನು ಅಧಿಕಾರಿಗಳಿಗೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೃಹತ್ ಗಾತ್ರದ ವಿಂಡ್ ಟರ್ಬೈನ್ ರೆಕ್ಕೆಗಳನ್ನು ಸಾಗಿಸಲು ರಸ್ತೆಬದಿಯ ಮರಗಳು ಹಾಗೂ ಗಿಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಾತ್ರಿ ವೇಳೆ ರಸ್ತೆ ನಿರ್ಮಾಣದ ಹೆಸರಿನಲ್ಲಿ ವೃಕ್ಷಸಂಪತ್ತಿಗೆ ಹಾನಿ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೆಲ ಸ್ಥಳೀಯ ಜನಪ್ರತಿನಿಧಿಗಳ ಬೆಂಬಲದಿಂದ ಕಂಪನಿಗಳು ನಿರ್ಭಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ. ಯಲಬುರ್ಗಾ ತಾಲೂಕಿನ ಬುಕ್ಕನಟ್ಟಿ ಗ್ರಾಮದ ಸರ್ವೇ ನಂ. 64, ಹಿರೇಬೊಮ್ಮನಾಳ ಹಾಗೂ ಗುನ್ನಾಳ ರಸ್ತೆ ಭಾಗಗಳಲ್ಲಿ ಮರಗಳನ್ನು ತೆರವುಗೊಳಿಸಿ, ರೈತರ ಜಮೀನಿನಲ್ಲಿ ದಬ್ಬಾಳಿಕೆಯಿಂದ ವಿಂಡ್ ಮಿಲ್ ಅಳವಡಿಕೆ ನಡೆಯುತ್ತಿದೆ ಎಂದು ರೈತರು ದೂರಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಬೇಕು. ವಿಂಡ್ ಮಿಲ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಪರಿಸರ ಮತ್ತು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.



