ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.

ಬೆಳಗ್ಗೆ ಸುಮಾರು 11 ಗಂಟೆಗೆ ಹಮೀದ್ ಅವರು ಪೇಟೆಗೆ ತೆರಳಿದ್ದ ವೇಳೆ, ಅವರ ಪತ್ನಿ ಖೈರುನ್ನಿಸಾ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗ್ಯಾಸ್ ಸಿಲಿಂಡರ್ನ ರೆಗ್ಯುಲೇಟರ್ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಖೈರುನ್ನಿಸಾ ಅವರು ಕೂಗಿಕೊಂಡಿದ್ದು, ಶಬ್ದ ಕೇಳಿಸಿಕೊಂಡ ನೆರೆಯ ನಿವಾಸಿ ಉಮ್ಮರ್ ಸ್ಥಳಕ್ಕೆ ಧಾವಿಸಿದ್ದಾರೆ. ಮನೆಯಲ್ಲಿದ್ದವರನ್ನು ಕೂಡಲೇ ಅಂಗಳಕ್ಕೆ ಕರೆತಂದು ರಕ್ಷಿಸಿದ್ದಾರೆ.

ಅವರು ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಗ್ಯಾಸ್ ಸಿಲಿಂಡರ್ ಭೀಕರವಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಅಡುಗೆ ಕೋಣೆ ಸಂಪೂರ್ಣ ಧ್ವಂಸಗೊಂಡಿದೆ.
ಮನೆಯಲ್ಲಿದ್ದ ಗೃಹಬಳಕೆಯ ವಸ್ತುಗಳು, ದಾಖಲೆಗಳು ಹಾಗೂ ಪೀಠೋಪಕರಣಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ವಿಟ್ಲದ ಇಂಡೇನ್ ಗ್ಯಾಸ್ ವಿತರಕ ‘ಸಾಯಿ ಗಣೇಶ್’ ಸಂಸ್ಥೆಯ ಮಾಲೀಕ ಸತೀಶ ಆಳ್ವ ಸೇರಿದಂತೆ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



