ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಒಂದು ತಿಂಗಳೊಳಗೆ ಸಮಸ್ಯೆ ಪರಿಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಮಂಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ದಿವಂಗತ ದಲಿತ ಮುಖಂಡ ಎಂ. ದೇವದಾಸ್ ಅವರ ನುಡಿನಮನ ಕಾರ್ಯಕ್ರಮದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಸೋಮಶೇಖರ್ ಮಾತನಾಡಿದರು.
ಮಂಗಳೂರಿನಲ್ಲಿ ಹಿಂದೆ ಸುಮಾರು 8,500 ಎಕರೆ ಡಿಸಿ ಮನ್ನಾ ಭೂಮಿ ಇದ್ದು, ಅದರಲ್ಲಿ ಬಹುಪಾಲು ಒತ್ತುವರಿಯಾಗಿದೆ ಎಂದು ಅವರು ಆರೋಪಿಸಿದರು. ಪ್ರಸ್ತುತ ಉಳಿದಿರುವ ಸುಮಾರು 190 ಎಕರೆ ಭೂಮಿಯನ್ನು ನಿವೇಶನ ರಹಿತ ಬಡವರು ಹಾಗೂ ಶೋಷಿತ ಸಮುದಾಯಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ 5,590 ಮಂದಿ ಅರ್ಜಿ ಸಲ್ಲಿಸಿದ್ದು, 2017ರಿಂದ ಕಡತ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿದೆ. 2024ರಲ್ಲಿಯೂ ಜಿಲ್ಲಾಡಳಿತವು ಕಂದಾಯ ಇಲಾಖೆಗೆ ಪತ್ರ ಬರೆದಿದ್ದರೂ, ಈವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸೋಮಶೇಖರ್ ಆರೋಪಿಸಿದರು.

ಕಂದಾಯ ಸಚಿವ ಜಿ. ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕಂದಾಯ ಸಚಿವರ ನಿವಾಸದ ಮುಂದೆ ಸೇರಿದಂತೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸೋಮಶೇಖರ್ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀಧರ್, ವೆಂಕಟಗಿರಿ, ಕೋಲಾರ ನಾರಾಯಣಸ್ವಾಮಿ, ಅಂಧಾನಿ ಸೋಮನಹಳ್ಳಿ, ಶಿವಮೂರ್ತಿ, ಸದಾಶಿವ ಪಡುಬಿದ್ರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



