ದಕ್ಷಿಣ ಕನ್ನಡ : ಮೂಡುಬಿದಿರೆ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾಂತಪ್ಪರನ್ನು ಅಮಾನತುಗೊಳಿಸಿರುವುದಾಗಿ ತಿಳಿದುಬಂದಿದೆ.ಇರುವೈಲು ಗ್ರಾಮ ಪಂಚಾಯತ್ಗಾಗಿ ನಿರ್ಮಿಸಲಾದ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಪಂಚಾಯತ್ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳನ್ನು ಆಹ್ವಾನಿಸುವಾಗ ಪ್ರೊಟೊಕಾಲ್ ಪಾಲಿಸಿಲ್ಲ ಎಂಬ ಕಾರಣವೊಡ್ಡಿ ಅಮಾನತು ಮಾಡಿರುವುದಾಗಿ ಹೇಳಲಾಗುತ್ತಿದ್ದು, ಸಾರ್ವಜನಿಕರು ಇದೊಂದು ರಾಜಕೀಯ ನಾಟಕ ಎನ್ನುತ್ತಿದ್ದಾರೆ, ಜನರ ತೆರಿಗೆ ದುಡ್ಡಿನಿಂದ ಜನಪ್ರತಿನಿಧಿಗಳ ನೇತೃತ್ವದಲ್ಲಿ ಆಡಳಿತ ನಡೆಸಲು ನಾವೇ ಆರಿಸಿ ಕಳುಹಿಸಿದ ಜನಪ್ರತಿನಿಧಿಗಳ ಜೊತೆ ಸಮನ್ವಯತೆ ಇಲ್ಲದಿರುವುದು ಮೂಲ ಕಾರಣವಾಗಿದ್ದು, ಇದೊಂದು ರಾಜಕೀಯ ಪ್ರೇರಿತ ಪ್ರಹಸನ ಇದಕ್ಕೆ ಅಧಿಕಾರಿಗಳನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಕಾರಣವಿಲ್ಲದೆ ಅಮಾನತು ಮಾಡಿರುವ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಅಮಾನತು ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳದಿದ್ದಲ್ಲಿ ಜಿಲ್ಲಾಡಳಿತದ ಮುಂದೆ ಸಮಾನ ಮನಸ್ಕ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಸೇರಿ ಜಿಲ್ಲಾಡಳಿತದ ಮುಂದೆ ಸತ್ಯಾಗ್ರಹ ಪ್ರತಿಭಟನೆ ನಡೆಸುವುದಾಗಿ ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್ ಎಚ್ಚರಿಸಿದ್ದಾರೆ.

ಮೂಡುಬಿದಿರೆ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ವಿಷಯದಲ್ಲಿ ಉತ್ತರ ಕೊಡಲು ನುಣುಚಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈರ್ವರು ಅಧಿಕಾರಿಗಳ ಅಮಾನತನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಶಾಸಕ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಇರುವೈಲು ಪಂಚಾಯತು ಅಧ್ಯಕ್ಷ ವಲೇರಿಯನ್ ಕುಟಿನ್ಹ, ಸದಸ್ಯರಾದ ರಝಾಕ್, ಪ್ರವೀಣ್ ಶೆಟ್ಟಿ, ಜಯಶಂಕರ್, ನಾಗೇಶ್ ಅಮೀನ್, ನವೀನ್, ಉಷಾ, ಮೋಹಿನಿ, ಲಲಿತಾ, ರುಕ್ಮಿಣಿ, ಕುಸುಮಾ, ನವ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.



