ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಮನ್ವಿತ್, ಸಂಭವಿಸಬಹುದಾಗಿದ್ದ ದೊಡ್ಡ ಅವಘಡವನ್ನು ತಪ್ಪಿಸಿ ಪ್ರಶಂಸೆಗೆ ಪಾತ್ರನಾಗಿದ್ದಾನೆ.

ಶಾಲೆಯ ಅಕ್ಷರ ದಾಸೋಹದ ಸಿಬ್ಬಂದಿ ಎಂದಿನಂತೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆ ಬಳಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಅವರು ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ ಮನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.
ಪರಿಸ್ಥಿತಿಯನ್ನು ಅರಿತುಕೊಂಡ ಬಾಲಕ ಯಾವುದೇ ಸೂಚನೆಗಾಗಿ ಕಾಯದೆ ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾನೆ.
ಸ್ವಯಂ ನಿರ್ಧಾರದಿಂದ ಸಮಯಪ್ರಜ್ಞೆ ಮೆರೆದ ಬಾಲಕನ ಧೈರ್ಯ ಹಾಗೂ ಬುದ್ಧಿವಂತಿಕೆಗೆ ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಹಾಗೂ ಸಿಆರ್ಪಿ ಜ್ಯೋತಿ ಅವರು ಬಾಲಕ ಮನ್ವಿತ್ನ ಸಮಯಪ್ರಜ್ಞೆಯನ್ನು ಶ್ಲಾಘಿಸಿ, ಆತನ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಣ್ಣ ವಯಸ್ಸಿನಲ್ಲೇ ಪರಿಸ್ಥಿತಿಯನ್ನು ಅರಿತು ತಕ್ಷಣ ಸೂಕ್ತ ನಿರ್ಧಾರ ಕೈಗೊಂಡ ಮನ್ವಿತ್ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.



