ಕಾರೊಂದು ಲಾರಿಗೆ ಡಿಕ್ಕಿ ಹೊಡೆದು ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಹಾಗು ಕಾರು ಚಾಲಕ ಸೇರಿ ಐದು ಜನ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಆ.13 ರಂದು ನಡೆದಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಶನಿವಾರ ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ತೆರಳಿದ್ದರು. ಇಂದು ಮುಂಜಾನೆ ವೇಳೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿವೊಂದಕ್ಕೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದರು.
ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು.
ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ತೀವ್ರ ಗಾಯಗಳಾಗಿತ್ತು. ಇವರನ್ನು ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಧಾಖಲಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಮಧುಸೂದನ್ (25) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



