ಅಕ್ರಮ ಸಂಬಂಧದ ಅನುಮಾನಕ್ಕೆ ಗಂಡ ತನ್ನ ಹೆಂಡತಿಯನ್ನು ಊರಿನ ಜನರ ಮುಂದೆಯೇ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ.

ಇದಕ್ಕೆ ಅತ್ತೆ, ಮಾವ ಕೂಡ ಕುಮ್ಮಕ್ಕು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ಈ ಅನಾಗರಿಕ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪೋಷಕರ ಮಾತು ಕೇಳಿಕೊಂಡು ಪತಿಯು ತನ್ನ 21 ವರ್ಷದ ಪತ್ನಿಯನ್ನೇ ವಿವಸ್ತ್ರಗೊಳಿಸಿದ್ದಾನೆ. ಬಳಿಕ ಆಕೆಗೆ ಮನ ಬಂದಂತೆ ಥಳಿಸಿ ನಂತರ ಆಕೆಯನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಇದನ್ನು ಅಲ್ಲಿದ್ದವರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.
ಸದ್ಯ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರಿಂದ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರು ಶೀಘ್ರವಾಗಿ ಕ್ರಮ ತೆಗೆದುಕೊಂಡು ಆರೋಪಿಗಳನ್ನ ಕೋರ್ಟ್ನಲ್ಲಿ ವಿಚಾರಣೆ ನಡೆಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು. ಎಡಿಜಿಪಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.



