ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದೆ.

ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗಳಾದವರನ್ನು ಆರಿಫ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಚರಂಡಿಗೆ ಬಿದ್ದಿದೆ. ಮುಂಜಾನೆ ಸುಮಾರು 4.30 ರವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಚಾಲನೆ ಮಾಡಿದರ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆ ನಡೆದ ಕೂಡಲೇ ಲಾರಿಯೊಳಗೆ ಬಾಕಿಯಾಗಿದ್ದ ಇಬ್ಬರು ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.



